ಸಂತೋಷ್ ರಾವ್ ಖುಲಾಸೆ ಪ್ರಶ್ನಿಸಿ ಹೈ ಕೋರ್ಟ್ ಮೆಟ್ಟಿಲೇರಿದ ಸಿಬಿಐ

11 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ನನ್ನು ಖುಲಾಸೆಗೊಳಿಸಿದ ಕೇಂದ್ರೀಯ ತನಿಖಾ ದಳವು ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮತ್ತೆ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.
ಪ್ರಕರಣದಲ್ಲಿ ಆರೋಪಿ ಎಂದು ಗುರುತಿಸಲ್ಪಟ್ಟಿದ್ದ ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ನೀಡಿದ ಹಲವು ತಿಂಗಳ ಬಳಿಕ ಇದೀಗ ಸಿಬಿಐ ಅಧಿಕಾರಿಗಳು ಸೌಜನ್ಯಾಳನ್ನು ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿ ಸಂತೋಷ್ರಾವ್ ಎಂದು ಸಾಬೀತು ಮಾಡಲು ಮುಂದಾಗಿದೆ.
ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತೀವ್ರ ಹೋರಾಟದ ಬಳಿಕ ರಾಜ್ಯ ಸರ್ಕಾರ ಸಿಬಿಐಗೆ ತನಿಖೆ ಜವಾಬ್ದಾರಿ ಒಪ್ಪಿಸಿ ಅದರಂತೆ ಸಂಸ್ಥೆಯು ತನಿಖೆ ನಡೆಸಿತ್ತು. ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಕೂಡಾ ನಡೆದಿತ್ತು. ಸಂತೋಷ್ ರಾವ್ ವಿರುದ್ಧ ಸಾಕ್ಷ್ಯಗಳಿಲ್ಲದ ಕಾರಣ ಹಾಗೂ ಆರೋಪಗಳನ್ನು ಸಾಬೀತುಪಡಿಸಲು ಸಿಬಿಐ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬ ಕಾರಣ ಕೋರ್ಟು ಸಂತೋಷ್ ರಾವ್ ನಿರಪರಾಧಿ ಎಂದು ತೀರ್ಪು ನೀಡಿ ಬಿಡುಗಡೆ ಮಾಡಿತ್ತು. 2023ರ ಜುಲೈ 16ರಂದು ನೀಡಿದ ತೀರ್ಪಿನ ವಿರುದ್ಧ ಈಗ ಮೇಲ್ಮನವಿ ಸಲ್ಲಿಸಲಾಗಿದೆ.
ಜುಲೈ 16ರಂದು ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ನೀಡಿದ್ದ ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯವು ಮೇಲ್ಮನವಿ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿತ್ತು. ಆದರೆ, ತೀರ್ಪು ಬಂದ ನಾಲ್ಕು ತಿಂಗಳ ಬಳಿಕ ಮನವಿ ಮಾಡಲಾಗಿದೆ. ಸಂತೋಷ್ ರಾವ್ ನಿಜವಾದ ಆರೋಪಿ ಎಂದು ಮೇಲ್ಮನವಿಯಲ್ಲಿ ಸಿಬಿಐ ವಾದ ಮಾಡಿದೆ ಮತ್ತು ಮರು ವಿಚಾರಣೆಯ ವೇಳೆ ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಒದಗಿಸುವ ಭರವಸೆ ನೀಡಿದೆ ಎನ್ನಲಾಗಿದೆ.
ಹಿಂದೊಮ್ಮೆ ಈ ಪ್ರಕರಣದ ಮರು ತನಿಖೆ ಕೋರಿ ಬೆಂಗಳೂರಿನ ಶೇಷಾದ್ರಿಪುರದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ ನವೀನ್ ಕುಮಾರ್ ಮತ್ತು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಆ ಸಂದರ್ಭದಲ್ಲಿ ಅದು ಕೆಲವೊಂದು ಪರ್ಯಾಯ ಮಾರ್ಗಗಳನ್ನು ಕೂಡ ಸೂಚಿಸಿತ್ತು.
















Leave a Reply