ಸಿ.ಎಂ ಸ್ಥಾನದಿಂದ ಕೆಳಗಿಳಿಯಲು ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ಆಡಿದ ಮಾತೆ ಕಾರಣವಾಯಿತು – ಸದಾನಂದ ಗೌಡ

ಸಿ.ಎಂ ಸ್ಥಾನದಿಂದ ಕೆಳಗಿಳಿಯಲು ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ಆಡಿದ ಮಾತೆ ಕಾರಣವಾಯಿತು – ಸದಾನಂದ ಗೌಡ

ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದೇ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕಡಬದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮದವರೊಂದಿಗೆ ಪಕ್ಷದ ನಾಯಕರ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದರು.
ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಒಕ್ಕಲಿಗ ಮುಖಂಡರು ಹಾಗೂ ನಾನು ಸೇರಿಕೊಂಡು ಭೈರ‌ವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಿದ್ದೆವು. ಅಲ್ಲಿ ನಾನು ಒಕ್ಕಲಿಗ ಸಮಾಜದಲ್ಲಿ ಹುಟ್ಟಿ ಆದಿಚುಂಚನಗಿರಿ ಸ್ವಾಮೀಜಿಯವರ ಆಶೀರ್ವಾದ ಪಡೆದು ರಾಜ್ಯದ ಮುಖ್ಯ ಮಂತ್ರಿಯಾದೆ ಎಂದು ಹೇಳಿದ್ದು ನನ್ನ ಸ್ಥಾನಕ್ಕೆ ಮುಳುವಾಯಿತು ಎಂದರು.

ಮುಖ್ಯಮಂತ್ರಿ ಸ್ಥಾನದಿಂದ ಇಳಿಯಪ್ಪಾ ಎಂದು ಹೇಳಿದರು ಎಂದು ಬೇಸರ ವ್ಯಕ್ತಪಡಿಸಿದ ಸದಾನಂದ ಗೌಡ ಪರೋಕ್ಷವಾಗಿ ಅಂದಿನ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೆಂಡಕಾರಿದರು.

ನಾನು ಚುನಾವಣೆ ರಾಜಕೀಯ ದಿಂದ ನಿವೃತ್ತನಾಗುತ್ತಿದ್ದೇನೆ. ಇನ್ನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯನಾಗಿರುತ್ತೇನೆ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ ಎಂದು ಹೇಳುತ್ತಲೇ ಇವತ್ತಿನ ರಾಜಕೀಯ ವ್ಯವಸ್ಥೆಯ ವಿರುದ್ಧ ಹರಿಹಾಯ್ದರು.
ಇಂದು ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆ ಇಲ್ಲ, ಹರಕು ನಾಲಗೆ, ಚೀಲ ತುಂಬಾ ದುಡ್ಡು, ಗುಂಪುಗಾರಿಕೆಯಿಂದಲೇ ರಾಜಕೀಯ ನಡೆಯುತ್ತಿದೆ. ಆದರೆ ಪ್ರಜಾಪ್ರಭುತ್ವದಲ್ಲಿ ರಾಜಕಾರಣ ಬೇಕೇ ಬೇಕು. ಉಳಿದ ಪಕ್ಷಗಳಿಗಿಂತ ನನ್ನ ಪಕ್ಷ ಒಳ್ಳೆಯದು ಎನ್ನುವ ನೆಲೆಯಲ್ಲಿ ಪಕ್ಷದ ಕೆಲಸ ಮಾಡುತ್ತೇನೆ ಎಂದರು.

Leave a Reply

You May Have Missed

error: Content is protected !!