ಹರಿಪ್ರಸಾದ್ ಮನೆಗೆ ಸಿಎಂ ಭೇಟಿ : ಕರಾವಳಿಯ ಪರಿಸ್ಥಿತಿಯ ಬಗ್ಗೆ ಗಂಭೀರ ಚರ್ಚೆ


ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ ಸದಸ್ಯ ಹಾಗು ಹಿರಿಯ ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಅವರ ಬೆಂಗಳೂರಿನ ನಿವಾಸಕ್ಕೆ ಗುರುವಾರ ಬೆಳಗ್ಗೆ ಭೇಟಿ ನೀಡಿ ಕರಾವಳಿಯ ಬೆಳವಣಿಗೆಗಳ ಕುರಿತು ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಸರಣಿ ಕೊಲೆಗಳು, ಹಿಂಸೆಯ ಘಟನೆಗಳು, ಪ್ರಚೋದನಕಾರಿ ಭಾಷಣಗಳು, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಇತ್ಯಾದಿಗಳ ಬಗ್ಗೆ ಗಂಭೀರ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸಾಚಾರಕ್ಕೆ ತಕ್ಷಣ ಕಡಿವಾಣ ಹಾಕಲು ಹಾಗು ಅಲ್ಲಿನ ಪೊಲೀಸ್ ವ್ಯವಸ್ಥೆಗೆ ಕಾಯಕಲ್ಪ ನೀಡಲು ಏನು ಮಾಡಬಹುದು ಎಂಬ ಬಗ್ಗೆ ಮುಖ್ಯಮಂತ್ರಿಗಳು ಬಿ ಕೆ ಹರಿಪ್ರಸಾದ್ ಅವರ ಸಲಹೆ ಪಡೆದಿದ್ದಾರೆ. ತಕ್ಷಣದ ಕ್ರಮವಾಗಿ ಜಿಲ್ಲೆಯ ಎಸ್ಪಿ ಹಾಗು ಮಂಗಳೂರಿನ ಪೊಲೀಸ್ ಕಮಿಷನರ್ ಇಬ್ಬರನ್ನೂ ತಕ್ಷಣ ಬದಲಾಯಿಸಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಎಂದು ತಿಳಿದು ಬಂದಿದೆ.
ಜಿಲ್ಲೆಯ ಪೊಲೀಸ್ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ಬದಲಾಯಿಸಲು ಏನು ಮಾಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ. ಬಿ ಕೆ ಹರಿಪ್ರಸಾದ್ ಅವರು ಶೀಘ್ರ ಸಂಪುಟ ಸೇರುವುದು ಖಚಿತವಾಗಿದ್ದು ಆ ಬಗ್ಗೆಯೂ ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ. ಈ ವೇಳೆ ಮುಖ್ಯಮಂತ್ರಿಗಳ ಜೊತೆ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಚಿವ ಝಮೀರ್ ಅಹ್ಮದ್ ಮತ್ತಿತರರೂ ಇದ್ದರು.




























Leave a Reply