ಜಾತಿಗಣತಿ ಸಮೀಕ್ಷೆ ಅ.31ರವರೆಗೆ ವಿಸ್ತರಣೆ — ಶಿಕ್ಷಕರಿಗೆ ವಿನಾಯಿತಿ, ಇತರೆ ಇಲಾಖಾ ಸಿಬ್ಬಂದಿಯಿಂದ ಮುಂದುವರಿಕೆ

ಜಾತಿಗಣತಿ ಸಮೀಕ್ಷೆ ಅ.31ರವರೆಗೆ ವಿಸ್ತರಣೆ — ಶಿಕ್ಷಕರಿಗೆ ವಿನಾಯಿತಿ, ಇತರೆ ಇಲಾಖಾ ಸಿಬ್ಬಂದಿಯಿಂದ ಮುಂದುವರಿಕೆ

ಬೆಂಗಳೂರು: ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ (ಜಾತಿಗಣತಿ) ಕಾರ್ಯಾಚರಣೆಗೆ ಸರ್ಕಾರವು ಹೊಸ ಅವಧಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಸಮೀಕ್ಷೆಯ ಅವಧಿಯನ್ನು ಅಕ್ಟೋಬರ್ 31, 2025ರವರೆಗೆ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಈ ಸಭೆಯಲ್ಲಿ, ಶಾಲಾ ಶಿಕ್ಷಕರನ್ನು ಜಾತಿಗಣತಿ ಸಮೀಕ್ಷೆಯ ಕರ್ತವ್ಯಗಳಿಂದ ಬಿಡುಗಡೆಗೊಳಿಸಿ, ಇನ್ನುಮುಂದೆ ಇತರೆ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಸಮೀಕ್ಷೆ ಮುಂದುವರಿಸುವ ನಿರ್ಧಾರ ಮಾಡಲಾಗಿದೆ. ಶಿಕ್ಷಕರಿಂದ ತರಗತಿ ಕಾರ್ಯವು ಅಡ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವೇಳೆ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿ, ಸಮೀಕ್ಷೆಯು ಸಮಗ್ರ ಹಾಗೂ ನಿಖರ ಮಾಹಿತಿಯನ್ನು ಸಂಗ್ರಹಿಸುವ ಉದ್ದೇಶವನ್ನು ಹೊಂದಿದೆ ಎಂದು ಸ್ಪಷ್ಟಪಡಿಸಿದರು. ಸಮೀಕ್ಷೆ ಮುಗಿದ ಬಳಿಕ, ರಾಜ್ಯದ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಸ್ಥಿತಿ ಕುರಿತು ನಿಖರ ಅಂಕಿ-ಅಂಶಗಳನ್ನು ಸರ್ಕಾರದ ಮುಂದೆ ತರಲಾಗುತ್ತದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಶಿವರಾಜ ತಂಗಡಗಿ, ರಾಮಲಿಂಗಾ ರೆಡ್ಡಿ, ಭೈರತಿ ಸುರೇಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  •  

Leave a Reply

You May Have Missed

error: Content is protected !!