ನೈತಿಕ ಪೊಲೀಸ್ ಗಿರಿ: ಹಿಂದೂ ವಿದ್ಯಾರ್ಥಿನಿಯರ ಜತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ





ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಜಾತ್ರೆಯ ಸಂಭ್ರಮದ ನಡುವೆಯೇ ಅಹಿತಕರ ಘಟನೆಯೊಂದು ನಡೆದಿದೆ. ಹಿಂದೂ ಸ್ನೇಹಿತೆಯರ ಜೊತೆ ಜಾತ್ರೆ ನೋಡಲು ಬಂದಿದ್ದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿ, ಅಪಹರಿಸಿರುವ ದೂರು ದಾಖಲಾಗಿದೆ. ಮಾ.18ರಂದು ಸಂಜೆ ಉಜಿರೆ ಜಾತ್ರಾ ಮೈದಾನದಲ್ಲಿ ಈ ಘಟನೆ ನಡೆದಿದೆ. ಮುಸ್ಲಿಂ ಬಾಲಕನು ತನ್ನ ಹಿಂದೂ ಸ್ನೇಹಿತೆಯರೊಂದಿಗೆ ಜಾತ್ರೆ ವೀಕ್ಷಿಸುತ್ತಿದ್ದನು.
ಈ ವೇಳೆ ಸ್ಥಳಕ್ಕೆ ಬಂದ ಯುವಕರ ಗುಂಪು ಅವಾಚ್ಯ ಶಬ್ದಗಳಿಂದ ನಿಂದಿಸಿದೆ. ಅಲ್ಲದೆ, ಬಾಲಕನ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಹಲ್ಲೆಯ ಬಳಿಕ ಬಾಲಕನನ್ನು ಬಲವಂತವಾಗಿ ಅಪಹರಿಸಿದ ಆರೋಪಿಗಳು, ಮೊಬೈಲ್ನಲ್ಲಿ ಬಲವಂತವಾಗಿ ವಿಡಿಯೋ ರೆಕಾರ್ಡಿಂಗ್ ಮಾಡಿಸಿದ್ದಾರೆ ಎನ್ನಲಾಗಿದೆ.
ಸಂತ್ರಸ್ತ 17 ವರ್ಷದ ಬಾಲಕ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಎಸ್ಪಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
17 ವರ್ಷದ ಬಾಲಕ ನೀಡಿದ ದೂರಿನನ್ವಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಈಗಾಗಲೇ ವಿಶೇಷ ತಂಡವನ್ನು ರಚಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.




















Leave a Reply