ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ನಾಟಿ ಮಾಡಲು ಬೆಳೆಸಲಾಗಿದ್ದ ಗಿಡಗಳು ಧ್ವಂಸ

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ನಾಟಿ ಮಾಡಲು ಬೆಳೆಸಲಾಗಿದ್ದ ಗಿಡಗಳು ಧ್ವಂಸ

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ನುಗ್ಗಿ ನರ್ಸರಿ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿದ ಘಟನೆ ಮುಂಡಾಜೆಯ ಕಾಪುವಿನಲ್ಲಿ ನಡೆದಿದೆ.

ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ಹಲಸು, ಬಿದಿರು, ಗಾಳಿ, ಹೆಬ್ಬಲಸು, ಬಲಿಂದ್ರ ಪಾಲೆ ಜಾತಿಯ ಸುಮಾರು 3,200ಕ್ಕಿಂತ ಅಧಿಕ ಗಿಡಗಳನ್ನು ಆನೆಗಳು ಸಂಪೂರ್ಣ ಧ್ವoಸಗೊಳಿಸಿದೆ.

ಒಂದು ಮರಿಯಾನೆ ಸಹಿತ ಎರಡು ಆನೆಗಳು ದಾಳಿ ಇಟ್ಟಿರಬಹುದೆಂದು ಶಂಕಿಸಲಾಗಿದೆ. ಕೆಲವು ದಿನಗಳ ಹಿಂದೆ ಧರ್ಮಸ್ಥಳದ ನೇರ್ತನೆಯಲ್ಲಿ ಕಂಡುಬಂದಿದ್ದ ಕಾಡಾನೆಗಳು ಇಲ್ಲಿಯೂ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಳೆದ ವರ್ಷವೂ ಈ ನರ್ಸರಿಗೆ ಕಾಡಾನೆಗಳು ದಾಳಿ ಇಟ್ಟು ಗಿಡ ಹಾಗೂ ನರ್ಸರಿ ಸೊತ್ತುಗಳಿಗೆ ಹಾನಿ ಉಂಟು ಮಾಡಿದ್ದವು.

ರಾಷ್ಟ್ರೀಯ ಹೆದ್ದಾರಿಯಿಂದ ಕೇವಲ 20 ಮೀ. ಅಂತರದಲ್ಲಿದೆ ಅರಣ್ಯ ಇಲಾಖೆಯ ಈ ನರ್ಸರಿ. ಆನೆಗಳು ಹೆದ್ದಾರಿ ಬದಿಯು ಸುಳಿದಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ. ಕಳೆದ ಸುಮಾರು ಹದಿನೈದು ದಿನಗಳಿಂದ ತಾಲೂಕಿನ ಒಂದಲ್ಲ ಒಂದು ಕಡೆ ಕಾಡಾನೆಗಳ ಉಪಟಳ ನಿರಂತರವಾಗಿ ನಡೆಯುತ್ತಿದೆ.

ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿ ಹರಿಪ್ರಸಾದ್, ಸಿಬ್ಬಂದಿ ಸದಾನಂದ, ಉಮೇಶ್ ನರ್ಸರಿ ವಾಚರ್ ಭೇಟಿ ನೀಡಿ ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್ ಗೆ ಮಾಹಿತಿ ನೀಡಿದ್ದಾರೆ.

Leave a Reply

You May Have Missed

error: Content is protected !!