ಪೊಲೀಸರಿಗೆ ಬೆದರಿಕೆ‌ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು

ಪೊಲೀಸರಿಗೆ ಬೆದರಿಕೆ‌ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಅಕ್ರಮ ಕಲ್ಲಿನಕೋರೆ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ವೇಳೆ ಠಾಣೆಗೆ ಬಂದು ಪೊಲೀಸರಿಗೆ ಬೆದರಿಕೆ‌ ಹಾಕಿ ಅವಾಚ್ಯವಾಗಿ ಬೈದು ಪೊಲೀಸ್ ಇಲಾಖೆಯ ಬಗ್ಗೆ ಹಾಗೂ ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೇಲಂತಬೆಟ್ಟುವಿನಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲಿನ ಕೋರೆಯ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಪ್ರಮುಖ ಆರೋಪಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿದ ವೇಳೆ ಶಾಸಕ ಹರೀಶ್ ಪೂಂಜ ಕೆಲವು ಕಾರ್ಯಕರ್ತರೊಂದಿಗೆ ಠಾಣೆಗೆ ಬಂದು ಶಾಸಕರ ಪಕ್ಷದ ಕಾರ್ಯಕರ್ತ ಶಶಿರಾಜ್ ಶೆಟ್ಟಿ ನನ್ನು ಬಿಡುಗಡೆ ಮಾಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಆರೋಪಿಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಅವಾಚ್ಯವಾಗಿ ಬೈದು‌ ಬೆದರಿಸಿದ್ದಾರೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿ ಪೊಲೀಸ್ ಇಲಾಖೆಗೆ ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ ದುರ್ವರ್ತನೆ ತೋರಿದ್ದಾರೆ. ಈ ಬಗ್ಗೆ ಶಾಸಕ ಹರೀಶ್ ಪೂಂಜ ಅವರ ವಿರುದ್ದ ಬೆಳ್ತಂಗಡಿ ಠಾಣೆಯಲ್ಕಿ ಅ.ಕ್ರ.57/2024, ಕಲಂ 353, 504,ಐಪಿಸಿಯಂತೆ ಪ್ರಕರಣ ದಾಖಲಿಸಲಾಗಿದೆ.

ಈ ಹಿಂದೆ ಕಳೆಂಜದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ ವೇಳೆ ಅದನ್ನು ತಡೆದ ಘಟನೆಯ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ ಅವರ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಪೊಲೀಸ್ ಇಲಾಖೆಯೇ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಪ್ರಕರಣ ದಾಖಲಿಸಿದೆ.

Leave a Reply

You May Have Missed

error: Content is protected !!