ಮಂಗಳೂರು ಪೊಲೀಸರ ಕಾರ್ಯಾಚರಣೆ; 5 ಗಂಟೆಯೊಳಗೆ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಚಡ್ಡಿಗ್ಯಾಂಗ್ ಬಂಧನ

ಮಂಗಳೂರು ಪೊಲೀಸರ ಕಾರ್ಯಾಚರಣೆ; 5 ಗಂಟೆಯೊಳಗೆ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಚಡ್ಡಿಗ್ಯಾಂಗ್ ಬಂಧನ

ಮಂಗಳೂರು ನಗರದ ಕೋಟೆಕಣಿಯ ಮನೆಗೆ ನುಗ್ಗಿ ಮನೆಮುಂದಿಯನ್ನು ಬೆದರಿಸಿ ದರೋಡೆ ಮಾಡಿದ್ದ ಚಡ್ಡಿಗ್ಯಾಂಗನ್ನು ಪೊಲೀಸರು ಘಟನೆ ನಡೆದ ಐದು ಗಂಟೆಯೊಳಗೆ ಬಂಧಿಸಿದ್ದಾರೆ. ಬಂಧನವಾಗಿದ್ದು, ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

ಮಂಗಳವಾರ ಮುಂಜಾನೆ ಸುಮಾರು 4 ಗಂಟೆಯ ಸುಮಾರಿಗೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ತುಂಡರಿಸಿ4 ಜನ ಯುವಕರು (ಚೆಡ್ಡಿ ಗ್ಯಾಂಗ್) ಒಳ ಪ್ರವೇಶಿಸಿ ಬೆದರಿಸಿ ದರೋಡೆ ಮಾಡಿತ್ತು. ಬಳಿಕ ಅದೇ ಮನೆಯವರ ಕಾರನಲ್ಲೇ ಪರಾರಿಯಾಗಿದ್ದರು.

ಘಟನೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಗುಣಾ ಜಿಲ್ಲೆಯ ರಾಜು ಸಿಂಗ್ವಾನಿಯ (24 ವರ್ಷ), ಭೂಪಾಲ್ ನ ಮಯೂರ್ (30 ವರ್ಷ), ಬಾಲಿ (22 ವರ್ಷ), ಗುಣಾ ಜಿಲ್ಲೆಯ ವಿಕ್ಕಿ (21 ವರ್ಷ) ಎಂಬ ನಾಲ್ವರನ್ನು ಬಂಧಿಸಲಾಗಿದೆ.

5 ಗಂಟೆಯೊಳಗೆ ಬಂಧನ
ದರೋಡೆಕೋರರು ಕಾರನ್ನು ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದರು. ಅಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆಎಸ್ಅರ್ಟಿಸಿ ಬಸ್ಸಿನಲ್ಲಿ ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು. ಸಾರಿಗೆ ಸಂಸ್ಥೆ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಅವರು ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದ ಮಾಹಿತಿ ಸಿಕ್ಕಿತ್ತು. ಆ ಬಸ್ಸಿನ ನಿರ್ವಾಹಕರು ನಾಲ್ವರು ತಮ್ಮಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ತಿಳಿಸಿದ್ದಾರೆ.

ಬೆಂಗಳೂರು ಬಸ್ ಮಾಹಿತಿ ಪಡೆದ ಮಂಗಳೂರು ಪೊಲೀಸರು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸೂಚನೆ ನೀಡಿ, ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿದ್ದ ಪ್ರಯಾಣಿಸುತ್ತಿದ್ದ ನಾಲ್ಕು ಜನರನ್ನು ವಶಕ್ಕೆ ಪಡೆಯಲಾಯಿತು.

ವಿಚಾರಣೆಯ ವೇಳೆ ನಾಲ್ವರು ಕೃತ್ಯವೆಸಗಿದ ಬಗ್ಗೆ ಒಪ್ಪಿಕೊಂಡಿದ್ದಾರೆ. ಕೋಟೆಕಣಿಯಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಗಳು ಹಾಗೂ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Leave a Reply

You May Have Missed

error: Content is protected !!