ಸಾಮಾಜಿಕ ಮುಖಂಡ, ದೈವ ಭಕ್ತ ಸತೀಶ್ ರೈ ಕೊಣಾಲುಗುತ್ತು ನಿಧನ



ನೆಲ್ಯಾಡಿ: ಕೊಣಾಲು ಗ್ರಾಮದ ಕೊಣಾಲುಗುತ್ತು ನಿವಾಸಿ ಹಾಗೂ ಸಾಮಾಜಿಕ ಮುಖಂಡ ಸತೀಶ್ ರೈ (63) ಅವರು ಬುಧವಾರ ರಂದು ಸಂಜೆ 4 ಗಂಟೆಗೆ ಮಂಗಳೂರಿನ ಇಂಡಿಯನ್ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸತೀಶ್ ರೈ ಅವರು ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಯಲ್ಲಿಯೇ ಇದ್ದರು. ಆದರೆ ಮೂರು ದಿನಗಳ ಹಿಂದೆ ಮತ್ತೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಇಂಡಿಯನ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದುದು ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಸಂಜೆ 4 ಗಂಟೆಗೆ ಅವರು ನಿಧನರಾದರು.
ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಸೇವೆಯಲ್ಲಿ ಅನನ್ಯ ಪಾತ್ರ
ಅಪಾರ ದೈವ ಭಕ್ತರಾಗಿದ್ದ ಸತೀಶ್ ರೈ ಅವರು ಕೊಣಾಲು ಗ್ರಾಮದ ಕಡೆಂಬಿಲತ್ತಾಯ ಗುಡ್ಡೆ ಶ್ರೀ ಚಕ್ರವರ್ತಿ ಕೊಡಮಣಿತ್ತಾಯಿ ಮತ್ತು ಸಪರಿವಾರ ದೈವಗಳ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾಗಿ, ಕೊಣಾಲು ದೇವತೆ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅವರ ಕಾರ್ಯಾವಧಿಯಲ್ಲಿ ಈ ಎರಡೂ ದೈವಸ್ಥಾನಗಳಲ್ಲಿ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ನೆರವೇರಿತ್ತು. ರಾಜಕೀಯವಾಗಿ ಗುರುತಿಸಿಕೊಂಡಿದ್ದ ಅವರು ನೆಲ್ಯಾಡಿ ಮಂಡಲ ಪಂಚಾಯತ್ ಸದಸ್ಯ, ಗೋಳಿತ್ತೊಟ್ಟು ಗ್ರಾಮ ಪಂಚಾಯತ್ ಸದಸ್ಯ, ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಹಾಗೂ ಹಲವು ಹುದ್ದೆಗಳನ್ನು ನಿಭಾಯಿಸಿದ್ದರು. ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿಯೂ ತಮ್ಮ ಸೇವೆಯನ್ನು ನೀಡಿದ ಅವರು ಗೋಳಿತ್ತೊಟ್ಟು ಸರಕಾರಿ ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ, ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ, ನೆಲ್ಯಾಡಿ ವಲಯ ಬಂಟರ ಸಂಘದ ಸಂಚಾಲಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಮೃತರು ಪತ್ನಿ ಚಿತ್ರಾವತಿ ಎಸ್. ರೈ, ಪುತ್ರ ಪ್ರತೀಕ್ಷ್ ರೈ, ಪುತ್ರಿ ಅಪೇಕ್ಷಾ, ಸಹೋದರರಾದ ವಿಶ್ರಾಂತ ಪ್ರಾಂಶುಪಾಲ ವಿಠಲ ರೈ ಕೊಣಾಲುಗುತ್ತು, ಮುಂಬೈ ನ್ಯೂ ಇಂಡಿಯಾ ಇನ್ಸೂರೆನ್ಸ್ ಕಂಪನಿಯ ಹಿರಿಯ ಅಧಿಕಾರಿ ಶ್ರೀಧರ ರೈ, ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಮಾ.20ರಂದು ಬೆಳಿಗ್ಗೆ ಕೊಣಾಲುಗುತ್ತು ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.




















Leave a Reply